Pages

Showing posts with label ಅಕ್ಕ ಮಹಾದೇವಿ. Show all posts
Showing posts with label ಅಕ್ಕ ಮಹಾದೇವಿ. Show all posts

ತೆರಣಿಯ ಹುಳು

Wednesday, 9 May 2012

ಸಾಹಿತ್ಯ - ಅಕ್ಕ ಮಹಾದೇವಿ


ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ
ತನ್ನ ನೂಲು ತನ್ನನೇ ಸುತ್ತಿ ಸುತ್ತಿ ಸಾವ ತೆರನಂತೆ
ಮನ ಬಂದುದ ಬಯಸಿ ಬಯಸಿ ಬೇವುತ್ತಿರುವೆನಯ್ಯ!
ಅಯ್ಯ, ಎನ್ನ ಮನದ ದುರಾಶೆಯ ಮಾಣಿಸಿ
ನಿಮ್ಮತ್ತ ತೋರಾ, ಚೆನ್ನಮಲ್ಲಿಕಾರ್ಜುನ

Read more...

ಬೆಂದ ಸಂಸಾರ ಬೆಂಬಿಡದೆ ಕಾಡುತ್ತಿರುವುದಯ್ಯ

ಸಾಹಿತ್ಯ - ಅಕ್ಕ ಮಹಾದೇವಿ


ಬೆಂದ ಸಂಸಾರ ಬೆಂಬಿಡದೆ ಕಾಡುತ್ತಿರುವುದಯ್ಯ
ಏವೆನಯ್ಯ ಏವೆನಯ್ಯ?
ಅಂದಂದಿನ ದಂದುಗಕ್ಕೆ ಏವೆನಯ್ಯ ಏವೆನಯ್ಯ?
ಬೆಂದೊಡಲ ಹೊರೆವುದಕ್ಕೆ ನಾನಾರೆ
ಚೆನ್ನಮಲ್ಲಿಕಾರ್ಜುನ, ಕೊಲ್ಲು ಕಾಯಿ ನಿಮ್ಮ ಧರ್ಮ!

Read more...

ಸಂಸಾರವೆಂಬ ಹಗೆಯಯ್ಯ

ಸಾಹಿತ್ಯ - ಅಕ್ಕ ಮಹಾದೇವಿ


ಸಂಸಾರವೆಂಬ ಹಗೆಯಯ್ಯ, ತಂದೆ,
ಎನ್ನ ವಂಶವಂಶ ತಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯ
ಎನ್ನುವನರಸಿಯರಸಿ ಹಿಡಿದು ಕೊಲ್ಲುತ್ತಿದೆಯಯ್ಯ
ನಿಮ್ಮ ಮರೆವೊಕ್ಕೆ ಕಾಯಯ್ಯ
ಎನ್ನ ಬಿನ್ನಪವನವಧಾರು, ಚೆನ್ನಮಲ್ಲಿಕಾರ್ಜುನಯ್ಯ

Read more...

ಕಲ್ಲ ಹೊಕ್ಕರೆ ಕಲ್ಲ ಬಿರಿಸಿದೆ

ಸಾಹಿತ್ಯ - ಅಕ್ಕ ಮಹಾದೇವಿ


ಕಲ್ಲ ಹೊಕ್ಕರೆ ಕಲ್ಲ ಬಿರಿಸಿದೆ
ಗಿರಿಯ ಹೊಕ್ಕರೆ ಗಿರಿಯ ಬಿರಿಸಿದೆ
ಭಾಪು ಸಂಸಾರವೇ, ಬೆನ್ನಿಂದ ಬೆನ್ನ ಹತ್ತಿ ಬಂದೆ
ಚೆನ್ನಮಲ್ಲಿಕಾರ್ಜುನಯ್ಯ, ಇನ್ನೇವೆನಿನ್ನೇವೆ!?

Read more...

ಆವಾಗಳೂ ನನ್ನ ಮನ ಉದರಕ್ಕೆ ಹರಿವುದು

ಸಾಹಿತ್ಯ - ಅಕ್ಕ ಮಹಾದೇವಿ


ಆವಾಗಳೂ ನನ್ನ ಮನ ಉದರಕ್ಕೆ ಹರಿವುದು
ಕಾಣಲಾರೆನಯ್ಯ ನಿಮ್ಮುವನು
ಭೇದಿಸಲಾರೆನಯ್ಯ ನಿಮ್ಮ ಮಾಯೆಯನು
ಮಾಯದ ಸಂಸಾರದಲ್ಲಿ ಸಿಲುಕಿದೆನು
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಹೊದ್ದುವಂತೆ ಮಾಡಾ ನಿಮ್ಮ ಧರ್ಮ

Read more...

ಎನ್ನ ಕಾಯ ಮಣ್ಣು, ಜೀವ ಬಯಲು

ಸಾಹಿತ್ಯ - ಅಕ್ಕ ಮಹಾದೇವಿ


ಎನ್ನ ಕಾಯ ಮಣ್ಣು, ಜೀವ ಬಯಲು
ಆವುದ ಹಿಡಿವೆನಯ್ಯ ದೇವ?
ನಿಮ್ಮನಾವ ಪರಿಯಲ್ಲಿ ನೆನೆವೆನಯ್ಯ?
ಎನ್ನ ಮಾಯವನು ಮಾಣಿಸಯ್ಯ ಚೆನ್ನಮಲ್ಲಿಕಾರ್ಜುನಯ್ಯ

Read more...

ನೀರಕ್ಷೀರದಂತೆ ನೀನಿಪ್ಪೆಯಾಗಿ

ಸಾಹಿತ್ಯ - ಅಕ್ಕ ಮಹಾದೇವಿ


ನೀರಕ್ಷೀರದಂತೆ ನೀನಿಪ್ಪೆಯಾಗಿ
ಆವುದು ಮುಂದು, ಆವುದು ಹಿಂದು ಎಂದರಿಯೆನು
ಆವುದು ಕರ್ತೃ, ಆವುದು ಭೃತ್ಯನೆಂದರಿಯೆನು
ಆವುದು ಘನ, ಆವುದು ಕಿರಿದೆಂದರಿಯೆನು
ಚೆನ್ನಮಲ್ಲಿಕಾರ್ಜುನಯ್ಯ, ನಿನ್ನನೊಲಿದು ಕೊಂಡಾಡಿದರೆ
ಇರುಹೆ ರುದ್ರನಾಗದೆ ಹೇಳಯ್ಯ

Read more...

ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯ?

ಸಾಹಿತ್ಯ - ಅಕ್ಕ ಮಹಾದೇವಿ


ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯ?
ನೀನು ಬಹಿರಂಗವ್ಯವಹಾರದೂರಸ್ಥನು!
ಅಂತರಂಗದಲ್ಲಿ ಧ್ಯಾನವ ಮಾಡಿ ಒಲಿಸುವೆನೆ ಅಯ್ಯ?
ನೀನು ವಾಙ್ಮನಕ್ಕತೀತನು
ಜಪಸ್ತೋತ್ರದಿಂದ ಒಲಿಸುವೆನೆ ಅಯ್ಯ?
ನೀನು ನಾದಾತೀತನು
ಭಾವಜ್ಞಾನದಿಂದೊಲಿಸುವೆನೆ ಅಯ್ಯ?
ನೀನು ಮತಿಗತೀತನು
ಹೃದಯಕಮಲಮಧ್ಯದಲ್ಲಿ ಇಂಬಿಟ್ಟುಕೊಂಬೆನೇ ಅಯ್ಯ?
ನೀನು ಸರ್ವಾಂಗಪರಿಪೂರ್ಣನು
ಅಯ್ಯ ನಿನ್ನ ಒಲಿಸಲೆನ್ನಳವಲ್ಲ
ನೀ ಒಲಿವುದೆ ಸುಖವಯ್ಯ ಚೆನ್ನಮಲ್ಲಿಕಾರ್ಜುನಯ್ಯ!

Read more...

ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು

ಸಾಹಿತ್ಯ - ಅಕ್ಕ ಮಹಾದೇವಿ


ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು
ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ಹದುಳಿಗರಲ್ಲದವರಲ್ಲಿ ಗಂಧಾಕ್ಷತಯನೊಲ್ಲೆಯಯ್ಯ ನೀನು
ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು
ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು
ತ್ರಿಕರಣಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯ ನೀನು
ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ
ಚೆನ್ನಮಲ್ಲಿಕಾರ್ಜುನಯ್ಯ.

Read more...

ದೇವ, ಎನ್ನ ಹೃದಯಕಮಲದೊಳಗೆ ಪ್ರಜ್ವಳಿಪ್ಪ ಬೆಳಗೆ

ಸಾಹಿತ್ಯ - ಅಕ್ಕ ಮಹಾದೇವಿ


ದೇವ, ಎನ್ನ ಹೃದಯಕಮಲದೊಳಗೆ ಪ್ರಜ್ವಳಿಪ್ಪ ಬೆಳಗೆ
ದೇವ, ಎನ್ನ ಮನದ ಮೊನೆಯೊಳೊಪ್ಪುತಿರ್ಪ ಬೆಳಗಿನೊಳಗೆ
ಗುರುವೆ ಬಾರ, ಪರವೆ ಬಾರ, ವರವೆ ಬಾರ, ದೇವದೇವ
ಹರನೆ ಬಾರ, ಸುಕೃತಸಾರ ಸರ್ಪಹಾರ ಬಾರ ದೇವ
ವೀರಭದ್ರ, ರುದ್ರ, ದುರಿತದೂರ, ವಿಶ್ವರೂಪ ಬಾರ
ಮಾರಮಥನ, ಪುಣ್ಯಕಥನ, ಸಹಜಮಿಥುನರೂಪ ಬಾರ
ತರಗಿರಿಯ ಪಿರಿಯ ಸಿರಿಯ ಸತ್ಯಶರಣ ಭರಣ ಬಾರ
ಬಾರ ಫಲವೆ, ಫಲದ ರಸವೆ, ರಸದ ಸವಿಯ ಸುಖವೆ ಬಾರ
ಬಾರ ಗುರುವೆ, ಬಾರ ಪರವೆ, ಬಾರ ವರವೆ ಮಲ್ಲಿನಾಥ
ಬಾರ ಧನವೆ, ಬಾರ ಸುಕೃತಸಾರ ಬಾರ ಮಲ್ಲಿನಾಥ
ಬರ ಸಿದ್ಧ, ಭವವಿರುದ್ಧ ಸುಪ್ರಸಿದ್ಧ ಮಲ್ಲಿನಾಥ
ಬಾರ ಮುಡುಹು ಮುಂದಲೆಗಳ ಕುರುಳನೀವೆ ಮಲ್ಲಿನಾಥ ಬಾರ

Read more...

ಅಯ್ಯ, ಪಾತಾಳವಿತ್ತಿತ್ತ, ಶ್ರೀಪಾದವತ್ತತ್ತ

ಸಾಹಿತ್ಯ - ಅಕ್ಕ ಮಹಾದೇವಿ


ಅಯ್ಯ, ಪಾತಾಳವಿತ್ತಿತ್ತ, ಶ್ರೀಪಾದವತ್ತತ್ತ
ಬ್ರಹ್ಮಾಂಡವಿತ್ತಿತ್ತ, ಮಣಿಮುಕುಟವತ್ತತ್ತ
ಅಯ್ಯ, ದಶದಿಕ್ಕುಇತ್ತಿತ್ತ, ದಶಭುಜಗಳತ್ತತ್ತ
ಚೆನ್ನಮಲ್ಲಿಕಾರ್ಜುನಯ್ಯ,
ನೀವೆನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯ!

Read more...

ಕಾಮ ಬಲ್ಲಿದನೆಂದರೆ

ಸಾಹಿತ್ಯ - ಅಕ್ಕ ಮಹಾದೇವಿ


ಕಾಮ ಬಲ್ಲಿದನೆಂದರೆ
ಉರುಹಿ ಭಸ್ಮವ ಮಾಡಿದ!
ಕಾಲ ಬಲ್ಲಿದನೆಂದರೆ ಕೆಡಹಿ ತುಳಿದ!
ಬ್ರಹ್ಮ ಬಲ್ಲಿದನೆಂದರೆ
ಶಿರವ ಚಿವುಟಿಯಾಡಿದ!
ಎಲೆ ಅವ್ವ, ನೀನು ಕೇಳಾ ತಾಯೆ,
ವಿಷ್ಣು ಬಲ್ಲಿದನೆಂದರೆ
ಮುರಿದು ಕಂಕಾಳವ ಪಿಡಿದ!
ತ್ರಿಪುರದ ಕೋಟೆ ಬಲ್ಲಿತ್ತೆಂದರೆ
ನೊಸಲ ಕಣ್ಣಿಂದುರುಹಿದನವ್ವ!
ಇದು ಕಾರಣ
ಚೆನ್ನಮಲ್ಲಿಕಾರ್ಜುನ ಗಂಡನೆನಗೆ!
ಜನನಮರಣಕ್ಕೊಳಗಾಗದವನ
ಬಲುಹನೇನ ಬಣ್ಣಿಪೆನವ್ವ!?

Read more...

ಶಿವಂಗೆ ತಪ್ಪಿದ ಕಾಲ ಭಸ್ಮವಾದುದನರಿಯಾ?

ಸಾಹಿತ್ಯ - ಅಕ್ಕ ಮಹಾದೇವಿ


ಶಿವಂಗೆ ತಪ್ಪಿದ ಕಾಲ ಭಸ್ಮವಾದುದನರಿಯಾ?
ಶಿವಂಗೆ ತಪ್ಪಿದ ಕಾಮನುರಿದುದನರಿಯಾ?
ಶಿವಂಗೆ ತಪ್ಪಿದ ಬ್ರಹ್ಮನ ಶಿರ ಹೋದುದನರಿಯಾ?
ಚೆನ್ನಮಲ್ಲಿಕಾರ್ಜುನನ ಪಾದಕ್ಕೆ ತಪ್ಪಿದೆಡೆ
ಭವಘೋರನರಕವೆಂದರಿಯಾ ಮರುಳೇ.

Read more...

ತನ್ನ ವಿನೋದಕ್ಕೆ ತಾನೇ ಸೃಜಿಸಿದ ಜಗತ್ತ

ಸಾಹಿತ್ಯ - ಅಕ್ಕ ಮಹಾದೇವಿ


ತನ್ನ ವಿನೋದಕ್ಕೆ ತಾನೇ ಸೃಜಿಸಿದ ಜಗತ್ತ!
ತನ್ನ ವಿನೋದಕ್ಕೆ ತಾನೇ ಸುತ್ತಿದನದಕ್ಕೆ ಸಕಲ ಪ್ರಪಂಚ!!
ತನ್ನ ವಿನೋದಕ್ಕೆ ತಾನೇ ತಿರಿಗಿಸಿದನನಂತ ಭವದುಃಖಂಗಳಲ್ಲಿ
ಇಂತೆನ್ನ ಚೆನ್ನಮಲ್ಲಿಕಾರ್ಜುನದೇವನೆಂಬ ಪರಶಿವನು
ತನ್ನ ಜಗದ್ವಿಲಾಸ ಸಾಕಾದ ಮತ್ತೆ
ತಾನೇ ಪರಿವನಾ ಮಾಯಾಪಾಶವನು!

Read more...

ಈಳೆ-ನಿಂಬೆ-ಮಾವು-ಮಾದಲಕ್ಕೆ

ಸಾಹಿತ್ಯ - ಅಕ್ಕ ಮಹಾದೇವಿ


ಈಳೆ-ನಿಂಬೆ-ಮಾವು-ಮಾದಲಕ್ಕೆ
ಹುಳಿನೀರೆರೆದವರಾರಯ್ಯ?
ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿನೀರೆರೆದವರಾರಯ್ಯ?
ಕಳವೆ-ಶಾಲಿಗೆ ಓಗರದ ಉದಕವನೆರೆದವರಾರಯ್ಯ?
ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ
ಪರಿಮಳದುದಕವನೆರೆದವರಾರಯ್ಯ?
ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ!
ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ
ತನ್ನ ಪರಿ ಬೇರಾಗಿಹ ಹಾಂಗೆ
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು
ಹಲವು ಜಗಂಗಳ ಕೂಡಿಕೊಂಡಿದ್ದರೇನು? ತನ್ನ ಪರಿ ಬೇರೆ!

Read more...

ನೆಲದ ಮರೆಯ ನಿಧಾನದಂತೆ

Tuesday, 8 May 2012

ಸಾಹಿತ್ಯ - ಅಕ್ಕ ಮಹಾದೇವಿ


ನೆಲದ ಮರೆಯ ನಿಧಾನದಂತೆ
ಫಲದ ಮರೆಯ ರುಚಿಯಂತೆ
ಶಿಲೆಯ ಮರೆಯ ಹೇಮದಂತೆ
ತಿಲದ ಮರೆಯ ತೈಲದಂತೆ
ಮರದ ಮರೆಯ ತೇಜಿದಂತೆ
ಭಾವದ ಮರೆಯ ಬ್ರಹ್ಮನಾಗಿಪ್ಪ
ಚೆನ್ನಮಲ್ಲಿಕಾರ್ಜುನನ ನಿಲವನಾರೂ ಅರಿಯಬಾರದು!

Read more...

ಅಘಟಿತ-ಘಟಿತನ ಒಲವಿನ ಶಿಶು

ಸಾಹಿತ್ಯ - ಅಕ್ಕ ಮಹಾದೇವಿ


ಅಘಟಿತ-ಘಟಿತನ ಒಲವಿನ ಶಿಶು
ಕಟ್ಟಿದೆನು ಜಗಕ್ಕೆ ಬಿರುದನು
ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರಂಗಳಿಗೆ
ಇಕ್ಕಿದೆನು ಕಾಲಲ್ಲಿ ತೊಡರನು
ಗುರುಕೃಪೆಯೆಂಬ ತಿಗುರನಿಕ್ಕಿ
ಮಹಾಶರಣೆಂಬ ತಿಲಕವನಿಕ್ಕಿ
ಶಿವಶರಣೆಂಬ ಅಲಗ ಕೊಂಡು
ನಿನ್ನ ಕೊಲುವೆ ಗೆಲುವೆ!
ಬಿಡು ಬಿಡು ಕರ್ಮವೇ, ನಿನ್ನ ಕೊಲ್ಲದೇ ಮಾಣೆನು!!
ಕಡೆಹಿಸಿಕೊಳ್ಪದೆನ್ನ ನುಡಿಯ ಕೇಳಾ-
ಕೆಡದ ಶಿವಶರಣೆಂಬ ಅಲಗನೆ ಕೊಂಡು
ನಿನ್ನ ಕೊಲುವೆ ಗೆಲುವೆ ನಾನು!
ಬ್ರಹ್ಮಪಾಶವೆಂಬ ಕಳನನೆ ಸವರಿ
ವಿಷ್ಣುಮಾಯೆಯೆಂಬ ಎಡಗೋಲ ನೂಕಿ
ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿಕಾಡುವೆ ನಾನು.

Read more...

Popular Posts